Saturday, June 21, 2025

ಸತ್ಯ | ನ್ಯಾಯ |ಧರ್ಮ

ನೂತನ ಸರ್ಕಾರದ ವಿಧಾನ ಸಭಾಧ್ಯಕ್ಷರ ಸ್ಥಾನಕ್ಕೆ ಹೆಸರು ಅಂತಿಮ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರದ ವಿವಿಧ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಬಹುತೇಕ ಅಂತಿಮಗೊಂಡಿದೆ.

ಕಾಂಗ್ರೆಸ್ ನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಹಾಗೂ ಟಿ.ಬಿ.ಜಯಚಂದ್ರ ಅವರುಗಳ ಹೆಸರುಗಳನ್ನು ಸ್ಪೀಕರ್ ಆಯ್ಕೆಯ ಪಟ್ಟಿಗೆ ಹೈಕಮಾಂಡ್ ಸೂಚಿಸಿತ್ತು. ಆದರೆ ಈ ಮೂವರೂ ನಾಯಕರು ಸ್ಪೀಕರ್ ಸ್ಥಾನಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ನ ಇನ್ನೋರ್ವ ಹಿರಿಯ ನಾಯಕ ಯು.ಟಿ.ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಮನವೊಲಿಸಲು ಸಫಲರಾಗಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಯ ಅವಧಿಗೆ ಹಿರಿಯ ನಾಯಕ ಯುಟಿ ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬಹುತೇಕ ಯುಟಿ ಖಾರದ್ ಅವರು ಅವಿರೋಧ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದ್ದು, ಮಂಗಳವಾರ ಮಧ್ಯಾಹ್ನ 12 ಗಂಟೆಯ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ. ವಿಧಾನ ಸಭಾಧ್ಯಕ್ಷರ ಸ್ಥಾನಕ್ಕೆ ಇಲ್ಲಿಯವರೆಗೂ ಸಾಮಾನ್ಯವಾಗಿ ಅವಿರೋಧ ಆಯ್ಕೆಯಾಗಿರುವ ಸಂಪ್ರದಾಯವಿದೆ. ಆ ನಿಟ್ಟಿನಲ್ಲಿ ಯುಟಿ ಖಾದರ್ ವಿರುದ್ಧ ಯಾರೂ ಕಣಕ್ಕಿಳಿಯುವುದು ಅಸಾಧ್ಯ ಎನ್ನಲಾಗಿದೆ.

ಸತತವಾಗಿ 5 ನೇ ಬಾರಿಗೆ ಮಂಗಳೂರಿನಿಂದ ಶಾಸಕರಾಗಿ ಆಯ್ಕೆಯಾಗುತ್ತಿರುವ ಯುಟಿ ಖಾದರ್ 2013 ರ ಸಿದ್ದರಾಮಯ್ಯ ಸರ್ಕಾರ ಮತ್ತು ಆ ನಂತರದ ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ವಿವಿಧ ಉನ್ನತ ಖಾತೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರ ಸರ್ಕಾರದ ಅವಧಿಯಲ್ಲೂ ವಿಧಾನಸಭಾ ಪ್ರತಿಪಕ್ಷದ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಯುಟಿ ಖಾದರ್ ಅವರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಮನವೊಲಿಸಲು ಸಫಲವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page