‘ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೂ, ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೂ ಯಾವುದೇ ವ್ಯತ್ಯಾಸವಿಲ್ಲ.. ಇದೂ ಭಯೋತ್ಪಾದನೆ ಅಲ್ಲವೇ?’ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ. ಕಳೆದ ಭಾನುವಾರ ನಡೆದ ಗುಂಪು ಹಲ್ಲೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷದ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹರೀಶ್ ಕುಮಾರ್ ಈ ಗುಂಪು ಹತ್ಯೆಯ ಹಿಂದೆ ಬಿಜೆಪಿ ನೇರ ಕೈವಾಡವಿದೆ. ಬಿಜೆಪಿಯ ಪಿಸ್ತೂಲ್ ರವಿ ಎಂಬಾತನ ಪ್ರಚೋದನೆ ಕಾರಣದಿಂದ ಈ ಹತ್ಯೆ ನಡೆದಿದೆ ಎಂಬ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವೂ ಇದೆ. ತಳಹಂತದ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡುವಲ್ಲಿ ವಿಫಲರಾಗಿದ್ದಾರೆ. ಸ್ಥಳೀಯ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಬೇಕು ಎಂದು ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.
“ಗಂಭೀರ ಘಟನೆ ನಡೆದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಇನ್ನೂ ಭೇಟಿ ನೀಡಿಲ್ಲ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಘಟನೆಯನ್ನು ಖಂಡಿಸಿದ್ದು, ಮೇ 3ಕ್ಕೆ ಜಿಲ್ಲೆಗೆ ಭೇಟಿ ನೀಡುವರು’ ಎಂದರು. ಪ್ರಕಾಶ್ ಸಾಲ್ಯಾನ್, ಶುಭೋದಯ ಆಳ್ವ ಮತ್ತಿತರರು ಇದ್ದರು.