Friday, January 16, 2026

ಸತ್ಯ | ನ್ಯಾಯ |ಧರ್ಮ

ರಾಜ್ಯ ರಾಜಕಾರಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ತಾವು ರಾಜ್ಯ ರಾಜಕಾರಣದಿಂದ ದೂರ ಉಳಿಯುವ ಉದ್ದೇಶ ಹೊಂದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದು, ಜನರ ಇಚ್ಛೆಯಿದ್ದರೆ ತಾವು ರಾಜ್ಯ ರಾಜಕಾರಣಕ್ಕೆ ಮರಳಲು ಸಿದ್ಧ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ತಾವು ಕೇಂದ್ರ ಸಚಿವರಾಗಿದ್ದರೂ ರಾಜ್ಯದ ಆಗುಹೋಗುಗಳ ಬಗ್ಗೆ ಗಮನಹರಿಸುತ್ತಿದ್ದು, ರಾಜ್ಯ ರಾಜಕಾರಣದಿಂದ ದೂರವಿದ್ದೇನೆ ಎಂದು ಭಾವಿಸುವುದು ತಪ್ಪು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆಯ ಕುರಿತು ಪ್ರತಿಕ್ರಿಯಿಸಿದ ಅವರು, ಜನರು ತಮಗೆ ಯಾವ ಸ್ಥಾನ ನೀಡುತ್ತಾರೋ ಅದಕ್ಕೆ ಬದ್ಧರಾಗಿರುವುದಾಗಿ ಮತ್ತು ಎನ್‌ಡಿಎ ಒಕ್ಕೂಟವನ್ನು ಅಧಿಕಾರಕ್ಕೆ ತರುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರು ತಮಗೆ ನೀಡಿರುವ ಎರಡು ಪ್ರಮುಖ ಖಾತೆಗಳ ಜವಾಬ್ದಾರಿಯನ್ನು ನಿರ್ವಹಿಸುವುದರಲ್ಲಿ ತಾವು ಬ್ಯುಸಿಯಾಗಿದ್ದರೂ, ಅಗತ್ಯ ಬಿದ್ದಾಗ ರಾಜ್ಯ ರಾಜಕಾರಣಕ್ಕೆ ಮರಳುವ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಇದೇ ವೇಳೆ ಸರ್ಕಾರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ, ಅಧಿಕಾರಿಗಳು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿಯದೆ ಅಥವಾ ತಮಗೆ ಬೇಕಾದ ಹುದ್ದೆ ಮತ್ತು ಬಡ್ತಿಗಾಗಿ ಅಕ್ರಮ ಮಾರ್ಗಗಳನ್ನು ಹಿಡಿಯದೆ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಹಾಗೂ ಸರ್ಕಾರದ ನಿಯಮಗಳ ಅಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು. ತಪ್ಪು ಮಾಡಿದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page