ಹಾಸನ : ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬನ್ನೂರು ಗ್ರಾಮದ ದೊಡ್ಡಕೆರೆಯಲ್ಲಿ ಸಾವಿರಾರು ಮೀನುಗಳು ಸತ್ತು ತೇಲುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮೀನು ಸಾಕಾಣಿಕೆದಾರರಲ್ಲಿ ಆತಂಕ ಮೂಡಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ವಡೆನೂರು ಗ್ರಾಮದ ಶಿವಣ್ಣ ಅವರು 65 ಸಾವಿರ ರೂಪಾಯಿಗೆ ಕೆರೆಯನ್ನು ಗುತ್ತಿಗೆ ಪಡೆದು ಮೀನು ಸಾಕಾಣಿಕೆ ಮಾಡುತ್ತಿದ್ದರು. ಒಂದು ಮೀನಿನ ಮರಿಯನ್ನು ಮೂರು ರೂಪಾಯಿಯಂತೆ ಖರೀದಿಸಿ ಸುಮಾರು ಒಂದು ಲಕ್ಷ ಮೀನು ಮರಿಗಳನ್ನು ಕೆರೆಗೆ ಬಿಟ್ಟಿದ್ದರು.
ಪ್ರಸ್ತುತ ಕೆರೆಯಲ್ಲಿ ಸುಮಾರು ಒಂದರಿಂದ ಒಂದೂವರೆ ಕೆಜಿ ತೂಕದ ಸಾವಿರಾರು ಮೀನುಗಳು ಸಾವನ್ನಪ್ಪಿರುವುದು ಕಂಡುಬಂದಿದೆ. ಕೆರೆಗೆ ವಿಷಕಾರಿ ಪದಾರ್ಥ ಬೆರೆಸಿರುವ ಸಾಧ್ಯತೆ ಅಥವಾ ನೀರಿನ ಮಟ್ಟ ಕುಸಿದು ಆಮ್ಲಜನಕದ ಕೊರತೆಯಿಂದ ಮೀನುಗಳು ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೀನುಗಳು ಇನ್ನೂ ಸಾವನ್ನಪ್ಪುತ್ತಲೇ ಇರುವುದರಿಂದ ಶಿವಣ್ಣ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಮಗೆ ಪರಿಹಾರ ನೀಡುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
