ಜೋಯ್ನಗರ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಜೋಯ್ನಗರದಲ್ಲಿ ಸೋಮವಾರ ದುಷ್ಕರ್ಮಿಗಳು ಟಿಎಂಸಿಯ ಸ್ಥಳೀಯ ನಾಯಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಪು ದಾಳಿಯಲ್ಲಿ ಆರೋಪಿ ಎಂದು ಶಂಕಿಸಲಾದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಬಮುಂಗಾಚಿ ಪ್ರದೇಶದ ಟಿಎಂಸಿ ಅಧ್ಯಕ್ಷ ಸೈಫುದ್ದೀನ್ ಲಸ್ಕರ್ (47) ಸೋಮವಾರ ಬೆಳಿಗ್ಗೆ ಪ್ರಾರ್ಥನೆಗೆ ಬಂದ ಸಮಯ ಸಮೀಪದಿಂದ ನಡೆದ ಗುಂಡಿನ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ಅವರ ಬೆಂಬಲಿಗರು ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆ ದಾಳಿಯಲ್ಲಿ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾನೆ. ಎರಡನೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಕ್ಕದ ದಲುವಾಖಾಲಿ ಗ್ರಾಮದಲ್ಲಿ ಲಸ್ಕರ್ ಬೆಂಬಲಿಗರು ಲೂಟಿ ಮಾಡಿದ್ದಾರೆ. ಈ ಘಟನೆಗಳ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಲಸ್ಕರ್ ಹತ್ಯೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸಿಪಿಎಂ ಹೇಳಿಕೊಂಡಿದೆ. ಅಧಿಕಾರಿಗಳು ಮತ್ತು ಪೊಲೀಸರು ಟಿಎಂಸಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.