ಹಾಸನ: ಅರಕಲಗೂಡು ತಾಲ್ಲೂಕಿನ ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ತಂಬಾಕು ಬೆಲೆ ತೀವ್ರವಾಗಿ ಕುಸಿದಿರುವ ಹಿನ್ನೆಲೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಮಾರುಕಟ್ಟೆಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ತಂಬಾಕು ಹರಾಜು ಪ್ರಕ್ರಿಯೆ ಹಾಗೂ ಬೇಲ್ಗಳ ದರ ನಿಗದಿಯಲ್ಲಿ ತಾರತಮ್ಯ ಉಂಟಾಗಿದೆ ಎಂದು ರೈತರು ವ್ಯಕ್ತಪಡಿಸಿದ ಅಸಮಾಧಾನವನ್ನು ಅವರು ಗಮನಿಸಿದರು. ರೈತರು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರು, ಮಾರುಕಟ್ಟೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರುಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ವಿಧಿಸಿರುವ ಅಬಕಾರಿ ಸುಂಕ ಹಾಗೂ ಜಿಎಸ್ಟಿ ಹೊರೆ ಪರಿಣಾಮ ತಂಬಾಕು ಬೆಲೆ ಕುಸಿತ ಉಂಟಾಗಿದೆ ಎಂಬುದನ್ನು ಉಲ್ಲೇಖಿಸಿ, ಈ ಕುರಿತು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ಈಗಾಗಲೇ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ತಂಬಾಕು ಬೆಳೆ ಬೆಳೆದ ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದ್ದು, ರೈತರ ಹಿತಾಸಕ್ತಿಗಾಗಿ ನಿರಂತರ ಹೋರಾಟ ನಡೆಸುವುದಾಗಿ ಸಂಸದರು ಭರವಸೆ ನೀಡಿದರು.
