ಮುಖ್ಯಮಂತ್ರಿ ಪ್ರಮಾಣವಚನ ಹಿನ್ನೆಲೆ ನಾಳೆ ಕೇಂದ್ರ ಭಾಗದಲ್ಲಿ – ಸಂಚಾರ ನಿರ್ಬಂಧ

ಬೆಂಗಳೂರು: ನಗರದಲ್ಲಿ ನಾಳೆ (ಜೂನ್ 3) ನಡೆಯಲಿರುವ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ಹಿನ್ನೆಲೆ ವಿಶೇಷ ಸಂಚಾರ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭವು ಲೋಕಭವನದ ಗ್ಲಾಸ್ ಹೌಸ್‌ನಲ್ಲಿ  ನಡೆಯಲಿದೆ. ದೇಶ ಹಾಗೂ ವಿವಿಧ ರಾಜ್ಯಗಳಿಂದ ಗಣ್ಯರು ಭಾಗವಹಿಸುವ ನಿರೀಕ್ಷೆ ಇರುವುದರಿಂದ ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಾಗಿ ಬೆಂಗಳೂರು ಪೊಲೀಸರು ಹಲವು ನಿರ್ಬಂಧಗಳನ್ನು ಘೋಷಿಸಿದ್ದಾರೆ.

ಮಧ್ಯಾಹ್ನ 12:00ರಿಂದ ರಾತ್ರಿ 8:00ರವರೆಗೆ ನಗರದ ಕೇಂದ್ರ ಭಾಗದಲ್ಲಿ ಸಂಚಾರ ನಿರ್ಬಂಧ ಇರಲಿದೆ. ಕಬ್ಬನ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಕ್ವೀನ್ಸ್ ಜಂಕ್ಷನ್ ಸುತ್ತಮುತ್ತ, ಸೇಂಟ್ ಮಾರ್ಕ್ಸ್ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ. ಪರ್ಯಾಯವಾಗಿ ಶಿವಾಜಿನಗರ, ಕನ್ನಿಂಗ್‌ಹ್ಯಾಮ್ ರಸ್ತೆ, ನೃಪತುಂಗ ರಸ್ತೆ, ಶಿವಾನಂದ ವೃತ್ತ, ಹೆಬ್ಬಾಳ ಹಾಗೂ ಔಟರ್ ರಿಂಗ್ ರಸ್ತೆಗಳನ್ನು ಬಳಸುವಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಸೂಚಿಸಿದ್ದಾರೆ.

ಇದೇ ವೇಳೆ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ಲೋಕಭವನ ರಸ್ತೆ, ಕ್ವೀನ್ಸ್ ರಸ್ತೆ, ಪ್ಯಾಲೇಸ್ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪಾರ್ಕಿಂಗ್ ನಿಷೇಧ ಜಾರಿಯಲ್ಲಿರುತ್ತದೆ. ನಗರದಾದ್ಯಂತ ಮಧ್ಯಾಹ್ನ 12:00ರಿಂದ ರಾತ್ರಿ 10:00ರವರೆಗೆ ಭಾರಿ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು