ರಾಷ್ಟ್ರೀಯ ಪಕ್ಷ ಘೋಷಣೆ ಮಾಡಲು ಹೊರಟಿರುವ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಆಹ್ವಾನದ ಮೇರೆಗೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲು ಕರ್ನಾಟಕದಿಂದ ಜೆಡಿಎಸ್ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ಪ್ರಮುಖ ಮುಖಂಡರ ಜೊತೆಗೂಡಿ ಹೈದರಾಬಾದ್ ನ ತೆಲಂಗಾಣ ಭವನಕ್ಕೆ ಭೇಟಿ ನೀಡಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಬುಧವಾರ ಮಧ್ಯಾಹ್ನ 1:19 ಕ್ಕೆ ಪಕ್ಷದ ಮುಖಂಡರು, ಸಚಿವರು, ಸಂಸದರು, ಶಾಸಕರು, ಎಂಎಲ್ಸಿಗಳು ಮತ್ತು ಜಿಲ್ಲಾ ಮಟ್ಟದ ಸಂಯೋಜಕರ ಸಮಾವೇಶದಲ್ಲಿ ರಾಷ್ಟ್ರೀಯ ಪಕ್ಷ ‘ಭಾರತ್ ರಾಷ್ಟ್ರ ಸಮಿತಿ’ ಪಕ್ಷವನ್ನು ಘೋಷಿಸಿದ್ದಾರೆ. ಹೈದರಾಬಾದ್ನಲ್ಲಿರುವ ಪಕ್ಷದ ಪ್ರಧಾನ ಕಛೇರಿ ತೆಲಂಗಾಣ ಭವನದಲ್ಲಿ ಭಾರತದ ವಿವಿಧ ಪ್ರಾದೇಶಿಕ ಪಕ್ಷಗಳ ಪ್ರಮುಖ ಮುಖಂಡರನ್ನು ಈ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ಈ ಸಂದರ್ಭದಲ್ಲಿ, 280 ಕ್ಕೂ ಹೆಚ್ಚು TRS ಪಕ್ಷದ ಕಾರ್ಯಕಾರಿ ಸದಸ್ಯರು, ಶಾಸಕರು ಮತ್ತು ಸಂಸದರು ಟಿಆರ್ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಯೊಂದಿಗೆ ವಿಲೀನಗೊಳಿಸುವ ನಿರ್ಣಯವನ್ನು ಅಂಗೀಕರಿಸಿದರು. ಪಕ್ಷದ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಶೀಘ್ರದಲ್ಲೇ ತಮ್ಮ ಭವಿಷ್ಯದ ಯೋಜನೆಗಳು ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅವರು ವಹಿಸಲು ಉದ್ದೇಶಿಸಿರುವ ಪಾತ್ರದ ಬಗ್ಗೆ ಮಾಹಿತಿ ತಿಳಿಸಲಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ತೃತೀಯ ರಂಗದ ರಚನೆ, ಮಹಾಘಟಬಂಧನ್ ಬಗ್ಗೆ ಹೆಚ್ಚು ಚರ್ಚಿತವಾಗುತ್ತಿರುವ ಈ ಸಂದರ್ಭದಲ್ಲಿ ಹೊಸ ರಾಷ್ಟ್ರೀಯ ಪಕ್ಷ ಭಾರತ್ ರಾಷ್ಟ್ರ ಸಮಿತಿ ರಚನೆ ಹೆಚ್ಚು ಚರ್ಚಿತವಾಗುತ್ತಿದೆ. ಇದರ ಜೊತೆಗೆ ಕರ್ನಾಟಕ ಹಿನ್ನಲೆಯ ಜೆಡಿಎಸ್ ಕೂಡಾ ಕೆಸಿಆರ್ ಜೊತೆ ಕೈ ಜೋಡಿಸಿರುವುದು ಮುಂದಿನ ದಿನಗಳಲ್ಲಿ ಜೆಡಿಎಸ್ ವಿಲೀನದ ಬಗ್ಗೆಯೂ ಪಕ್ಷದ ವಲಯದಲ್ಲಿ ಅನುಮಾನ ಸೃಷ್ಟಿಯಾಗಿದೆ
