Wednesday, June 26, 2024

ಸತ್ಯ | ನ್ಯಾಯ |ಧರ್ಮ

ಯು.ಪಿ ಮಾದರಿ ಎಂದರೆ ಇದೆನಾ?: ಬಿಜೆಪಿ ವಿರುದ್ದ ಸಿದ್ದು ವಾಗ್ದಾಳಿ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ನೆರೆ ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳ ವೀಕ್ಷಣೆಗೆಂದು ಗುರುವಾರ ಹೋಗಿದ್ದ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದು ಗೋ ಬ್ಯಾಕ್‌ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು,ಇದನ್ನ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡ ಕಷ್ಟವಾಗಬಹುದು. ನಿಮ್ಮ ಯು.ಪಿ ಮಾದರಿ ಎಂದರೆ ಇದೆನಾ?ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ. ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್ ಎಸ್ ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹೀಗಾಗಿ ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲ ಎಂದು ಹರಿಹಾಯ್ದರು.

ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮುಖ್ಯಮಂತ್ರಿ ಅವರು, ತಮ್ಮದೇ ಪಕ್ಷದ ಕಾರ್ಯಕರ್ತರು ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗೆ ಮಾಡಿದ್ದಾರೆ. ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ? ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಇದನ್ನೇ ನಾನು ಪ್ರಶ್ನಿಸಿದ್ದು ಎಂದು ಕಿಡಿಕಾರಿದರು.

ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ? ಬಾಬಾಸಾಹೇಬ್ ಅಂಬೇಡ್ಕರ್ ಅವರ ಪೋಟೊವನ್ನು ಪಕ್ಷದ ಕಚೇರಿಯಲ್ಲಿಯೇ ಕಸದ ಬುಟ್ಟಿಗೆ ಎಸೆದಿರುವ  ಬಿಜೆಪಿ ನಾಯಕರ ಹೃದಯದೊಳಗೆ ಗಾಂಧೀಜಿಯೂ, ಇಲ್ಲ ಅಂಬೇಡ್ಕರ್ ಅವರೂ ಇಲ್ಲ. ಅವರೊಳಗೆ ಇರುವುದು ನಾಥುರಾಮ್ ಗೋಡ್ಸೆ ಮಾತ್ರ. ಈ ಸತ್ಯವನ್ನು ಮೊದಲು ಒಪ್ಪಿಕೊಳ್ಳಿ ಎಂದು ಹೇಳಿದರು.

ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಈಗ ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು