ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್ ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು, 21 ಪ್ರಯಾಣಿಕರಿಗೆ ಗಾಯ

ಉತ್ತರಪ್ರದೇಶ (ಉನ್ನಾವ್): ಪ್ರಯಾಣಿಕರಿಂದ ತುಂಬಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಆರು ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಮತ್ತೊಂದು 21 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಈ ರಸ್ತೆ ಅಪಘಾತ ಜರುಗಿದೆ.

ದೆಹಲಿಯಿಂದ ಬಿಹಾರದ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಅರಸ್ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಸ್‌ಪ್ರೆಸ್‌ವೇಯ 262 ನೇ ಕಿಲೋಮೀಟರ್ ಮೈಲಿಗಲ್ಲು ಸಮೀಪ ಈ ದುರಂತ ಸಂಭವಿಸಿದ್ದು, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು ಹಾಗೂ ಹೆದ್ದಾರಿ ಪ್ರಾಧಿಕಾರದ ರಕ್ಷಣಾ ಸಿಬ್ಬಂದಿ ಜೆಸಿಬಿ ಮತ್ತು ಅಗತ್ಯ ಉಪಕರಣಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬಸ್ಸಿನ ಅವಶೇಷಗಳಡಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ.

ಖೈದಿ ಮತ್ತು ಸಬ್‌ಇನ್ಸ್‌ಪೆಕ್ಟರ್ ಸಾವು:

ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಬಿಹಾರದ ಸಿವಾನ್ ಪೊಲೀಸ್ ಇಲಾಖೆಯ ಸಬ್‌ಇನ್ಸ್‌ಪೆಕ್ಟರ್ (SI) ರಾಮಚಂದ್ರ ಮತ್ತು ಬಿಗಿ ಭದ್ರತೆಯಲ್ಲಿದ್ದ ಖೈದಿ ಛತ್ರಪಾಲ್ ಕೂಡ ಸೇರಿದ್ದಾರೆ ಎಂದು ಅರಸ್ ಪೊಲೀಸ್ ಠಾಣೆಯ ಉನ್ನತ ಅಧಿಕಾರಿ ಸಂಜೀವ್ ಕುಶ್ವಾಹಾ ದೃಢಪಡಿಸಿದ್ದಾರೆ. ಅಧಿಕೃತ ಕರ್ತವ್ಯದ ಭಾಗವಾಗಿ ಖೈದಿಯನ್ನು ಸಿವಾನ್‌ನಿಂದ ದೆಹಲಿ ನ್ಯಾಯಾಲಯಕ್ಕೆ ಕರೆದೊಯ್ದು, ಮರಳಿ ಬಿಹಾರಕ್ಕೆ ಕರೆತರುತ್ತಿದ್ದಾಗ ಈ ದುರಂತ ಹಣೆಬರಹ ಎದುರಾಗಿದೆ.

ಅಪಘಾತದಲ್ಲಿ ಗಾಯಗೊಂಡ 21 ಜನರ ಪೈಕಿ 10 ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅದರಲ್ಲಿ ನಾಲ್ವರ ಪರಿಸ್ಥಿತಿ ಅತ್ಯಂತ ವಿಷಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರನ್ನು ಹೆಚ್ಚಿನ ಮತ್ತು ತುರ್ತು ಚಿಕಿತ್ಸೆಗಾಗಿ ಲಕ್ನೋದ ಪ್ರಸಿದ್ಧ ‘ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿ’ (KGMU) ಟ್ರಾಮಾ ಸೆಂಟರ್‌ಗೆ ರವಾನಿಸಲಾಗಿದೆ.

ಇನ್ನುಳಿದವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉನ್ನಾವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು