ಬೆಳಗಾವಿ : ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚು ಮಾಡದ ಸರ್ಕಾರ ವಾಲ್ಮೀಕಿ ಜಯಂತಿಯನ್ನು ಆಚರಿಸುವಂತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರದಿಂದ ಅಕ್ಟೋಬರ್ 9ರಂದು ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ಇದಕ್ಕೆ ವಾಲ್ಮೀಕಿ ಸಂಘ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಈ ಕುರಿತು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ “ಮೀಸಲಾತಿ ಪ್ರಮಾಣ ಹೆಚ್ಚು ಮಾಡದೆ ಇರುವ ಸರ್ಕಾರಕ್ಕೆ ವಾಲ್ಮೀಕಿ ಜಯಂತಿಯನ್ನು ಆಚರಿಸುವುದಕ್ಕೆ ಯಾವುದೇ ರೀತಿಯ ನೈತಿಕ ಹಕ್ಕಿಲ್ಲ“ ಎಂದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಬಾರಿ ಸರ್ಕಾರದ ನಡೆಸುವ ಕಾರ್ಯಕ್ರಮಗಳನ್ನು ಬಹಿಷ್ಕರಿಸಿ ಕೇವಲ ಸಂಘ ಸಮುದಾಯಗಳ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಚರಿಸಿಕೊಳ್ಳುತ್ತೇವೆ. ಸರ್ಕಾರ ಬಿಟ್ಟು ಯಾರೂ ಬೇಕಾದರೂ ಯಾವ ಸಂಘಟನೆಯವರು ಬೇಕಾದರೂ ಆಚರಿಸಬಹುದು ಎಂದು ಹೇಳಿದರು.
ನಮ್ಮ ಸಮುದಾಯಗಳಿಗಿರುವ ಶೇ 03ರಷ್ಟು ಮೀಸಲಾತಿಯನ್ನು ಶೇ 7.5ಕ್ಕೆ ಏರಿಸಬೇಕು. ಇದು ಸಮುದಾಯದ ಜನಸಂಖ್ಯಾ ಅನುಗುಣವಾಗಿ ನಮ್ಮ ನ್ಯಾಯ ಸಮ್ಮತ ಬೇಡಿಕೆಯಾಗಿದೆ . ಇದಕ್ಕಾಗಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸುಮಾರು 02 ವರ್ಷಗಳಿಂದ ಹೋರಾಟ ನಡೆಸುತ್ತಲೇ ಇದ್ದಾರೆ. ಮತ್ತು ಸಮುದಾಯದವರೂ ನಿರಂತರ ಹೋರಾಟಗಳನ್ನು ಮಾಡುತ್ತಲೇ ಇದ್ದಾರೆ. ಇದಕ್ಕೆ ಸಮಾಧಾನವಾಗಿ ಶ್ರೀರಾಮುಲು ಅವರು ತಾನು ಅಧಿಕಾರಕ್ಕೆ ಬಂದ 24 ಗಂಟೆಯ ಒಳಗೆ ಮೀಸಲಾತಿ ಬೇಡಿಕೆ ನೀಡಿದ್ದರು. ಆದರೆ ಈವರೆಗೂ ಯಾವುದೇ ರೀತಿಯ ಬದಲಾವಣೆಗಳು ಆಗಿಲ್ಲ ಎಂದು ಕಿಡಿಕಾರಿದ್ದಾರೆ.
ಹಾಗೆಯೇ ಅಕ್ಟೋಬರ್ 09 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನ ಬಳಿ ಪುರುಷೋತ್ತಮಾನಂದ ಪುರಿ ಶ್ರೀಗಳು ಧರಣಿ ನಡೆಸಲಿದ್ದು ಅಲ್ಲಿಯೇ ವಾಲ್ಮೀಕಿ ಮಹರ್ಷಿಯ ಭಾವಚಿತ್ರವನ್ನಿಟ್ಟು ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.