ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ, ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಎಂದು ಘೋಷಿಸಿದ್ದಾರೆ.
ಗೋರಖ್ಪುರದಲ್ಲಿ ‘ಏಕ್ತಾ ಯಾತ್ರೆ’ ಹೆಸರಿನಲ್ಲಿ ಆಯೋಜಿಸಿದ್ದ ಸಾಮೂಹಿಕ ‘ವಂದೇ ಮಾತರಂ’ ಗೀತಾಲಾಪನೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಈ ಘೋಷಣೆ ಮಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಗೀತೆಯನ್ನು ಹಾಡುವುದರಿಂದ ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ಅದರ ಬಗ್ಗೆ ಗೌರವ ಮತ್ತು ದೇಶಭಕ್ತಿ ಮೂಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕೋಟ್ಯಂತರ ಭಾರತೀಯರಲ್ಲಿ ಸ್ಫೂರ್ತಿ ತುಂಬಿದ ‘ವಂದೇ ಮಾತರಂ’ ಗೀತೆಗೆ ನವೆಂಬರ್ 7 ರಂದು 150 ವರ್ಷಗಳು ಪೂರ್ಣಗೊಂಡಿವೆ. ಈ ಸಂದರ್ಭದಲ್ಲಿ ಒಂದು ವರ್ಷವಿಡೀ ಉತ್ಸವಗಳನ್ನು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ‘ವಂದೇ ಮಾತರಂ’ ಗೀತಾಲಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು. ಈ ಗೀತೆಯನ್ನು ಬಂಕಿಮಚಂದ್ರ ಚಟರ್ಜಿ ಅವರು ನವೆಂಬರ್ 7, 1875 ರಂದು ರಚಿಸಿದ್ದರು.
