Sunday, June 16, 2024

ಸತ್ಯ | ನ್ಯಾಯ |ಧರ್ಮ

ಶಾಸಕ ಆರಗ ಜ್ಞಾನೇಂದ್ರ ಮೇಲೆ ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಮೈಬಣ್ಣದ ವಿಚಾರದಲ್ಲಿ ನಾಲಿಗೆ ಹರಿಬಿಟ್ಟಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಆಕ್ರೋಶ ಹೊರಹಾಕಿದೆ.

ರಾಜಕೀಯ ನಾಯಕರ ಬಣ್ಣದ ವಿಚಾರದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಚೇರಿಗೆ ತೆರಳಿ ದೂರು ಸಲ್ಲಿಸಿದೆ.

ಇದಕ್ಕೂ ಮುನ್ನ ಮಹಾಸಭಾದ 20 ಕ್ಕೂ ಹೆಚ್ಚು ಜಿಲ್ಲಾಧ್ಯಕ್ಷರು ಸಭೆ ನಡೆಸಿ ಜ್ಞಾನೇಂದ್ರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದರೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಷ್ಟೆ ಅಲ್ಲದೆ ಆರಗ ಜ್ಞಾನೇಂದ್ರ ಅವರನ್ನು ಪಕ್ಷದಿಂದ ವಜಾಗೊಳಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮಹಾಸಭಾ ಸಭೆಯಲ್ಲಿ ಬಿಜೆಪಿ ಪಕ್ಷಕ್ಕೂ ಒತ್ತಾಯಿಸಲಾಗಿದೆ. ಈ ಬಗ್ಗೆ ಬಿಜೆಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮಾತನಾಡಿ, ಜ್ಞಾನೇಂದ್ರ ಅವರು ಆಗಸ್ಟ್ 1 ರಂದು ಹೇಳಿಕೆ ನೀಡಿದ್ದು, ಮರುದಿನ ಬೆಂಗಳೂರಿನ ಸದಾಶಿವನಗರ ಪೊಲೀಸರು ದೂರು ದಾಖಲಿಸಿದ್ದಾರೆ. ಆದರೆ ಒಂದು ವಾರ ಕಳೆದರೂ ಪೊಲೀಸರ ಕಡೆಯಿಂದಾಗಲಿ, ಸರ್ಕಾರದ ಕಡೆಯಿಂದಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಇನ್ನು ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರನ್ನು ಭೇಟಿ ಮಾಡಿದ ಮಹಾಸಭಾ ಪದಾಧಿಕಾರಿಗಳು, ಖರ್ಗೆ ಮತ್ತು ಅರಣ್ಯ ಸಚಿವ ಖಂಡ್ರೆ ವಿರುದ್ಧ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ, ದೂರನ್ನು ಪರಿಶೀಲಿಸುವುದಾಗಿ ಖಾದರ್ ಭರವಸೆ  ನೀಡಿದರು.

ಜ್ಞಾನೇಂದ್ರ ಅವರ ಹೇಳಿಕೆಗೆ ದೇಶಾದ್ಯಂತ ನೆಟಿಜನ್‌ಗಳಿಂದ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಸಂಘಟನೆಯ ಸಭೆಯಲ್ಲಿ ಚರ್ಚಿಸಿದ್ದರೂ ಜ್ಞಾನೇಂದ್ರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಟೀಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರು ಸ್ವಯಂ ಪ್ರೇರಿತವಾಗಿ ಮಹಾಸಭಾ ಸಭೆ ಕರೆದಿದ್ದಾರೆ ಎಂದು ಪ್ರಸನ್ನ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು