ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಬುಧವಾರ ಕಾಂಗ್ರೆಸ್ ಸರ್ಕಾರವು ರೈತರ ಹಿತಾಸಕ್ತಿಗಳಿಗಿಂತ ರಿಯಲ್ ಎಸ್ಟೇಟ್ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಕ್ರೆಸ್ಟ್ ಗೇಟ್ಗಳ ದುರಸ್ತಿ ಕಾರ್ಯದಲ್ಲಿ ಮಾಡಿದ ಅತಿಯಾದ ವಿಳಂಬದಿಂದಾಗಿ ರೈತರು ಎರಡನೇ ಬೆಳೆಯನ್ನು ಬೆಳೆಯಲು ಸಾಧ್ಯವಾಗಲಿಲ್ಲ. ಇದರಿಂದಾಗಿ ರೈತರು ಭಾರಿ ನಷ್ಟ ಅನುಭವಿಸಿದ್ದಾರೆ. ಆದರೆ, ಮತ್ತೊಂದೆಡೆ ಫಲವತ್ತಾದ ಜಮೀನಿನಲ್ಲಿ ಬಿಡದಿ ಟೌನ್ಶಿಪ್ ಸ್ಥಾಪಿಸಲು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕೆಲವೇ ಗಂಟೆಗಳಲ್ಲಿ ನಿರ್ಧಾರ ತೆಗೆದುಕೊಂಡರು. ಇದು ಈ ಸರ್ಕಾರದ ಆದ್ಯತೆಗಳು ಎಲ್ಲ ಇವೆ ಎಂಬುದನ್ನು ತೋರಿಸುತ್ತದೆ” ಎಂದು ಕಿಡಿಕಾರಿದರು.
“ಬಿಡದಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ಫಲವತ್ತಾದ ಭೂಮಿಯನ್ನು ಉಳಿಸಿಕೊಳ್ಳಲು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಅವರ ಧ್ವನಿಗೆ ಸ್ಪಂದಿಸಬೇಕಿತ್ತು. ಆದರೆ ಅದಕ್ಕೆ ಬದಲಾಗಿ, ರೈತರು ಮತ್ತು ರೈತ ಮುಖಂಡರ ಮೇಲೆ ಮೊಕದ್ದಮೆಗಳನ್ನು ದಾಖಲಿಸುವ ಮೂಲಕ ಅವರ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸರ್ಕಾರ ತಕ್ಷಣವೇ ಈ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಟೌನ್ಶಿಪ್ ಯೋಜನೆಯನ್ನು ಕೈಬಿಡಬೇಕು” ಎಂದು ಬಿಜೆಪಿ ರಾಜ್ಯ ಅಧ್ಯಕ್ಷರು ಆಗ್ರಹಿಸಿದರು.
“ರೈತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ಮತ್ತು ಬಿಡದಿ ಟೌನ್ಶಿಪ್ ಯೋಜನೆಯನ್ನು ಕೈಬಿಡಲು ಒತ್ತಾಯಿಸಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ನ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಿನವಿಡೀ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ” ಎಂದು ವಿಜಯೇಂದ್ರ ತಿಳಿಸಿದರು.
