ಬೆಂಗಳೂರು: ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸ್ಪಷ್ಟನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು “ಸಾಲದ ಸುಳಿ”ಗೆ ತಳ್ಳಿದೆ ಎಂದು ಬುಧವಾರ ಪುನರುಚ್ಚರಿಸಿದ್ದಾರೆ. ಬಜೆಟ್ ಪ್ರತಿ ಮತ್ತು ಶ್ವೇತಪತ್ರದ ನಡುವಿನ ವ್ಯತ್ಯಾಸ ಮುಖ್ಯಮಂತ್ರಿಗಳಿಗೆ ತಿಳಿದಿಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ.
ರಾಜ್ಯದ ಸಾಲದ ಹೊರೆ 8 ಲಕ್ಷ ಕೋಟಿ ರೂಪಾಯಿ ದಾಟಿದ್ದು, ವಾರ್ಷಿಕವಾಗಿ ಕೇವಲ ಬಡ್ಡಿ ಪಾವತಿಗಾಗಿಯೇ 48,000 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ ಎಂದು ವಿಜಯೇಂದ್ರ ಅಂಕಿಅಂಶಗಳನ್ನು ನೀಡಿದರು. “ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿದ್ದು, ಪಿಂಚಣಿ ವಿತರಣೆಯಲ್ಲಿ ವಿಳಂಬ ಮತ್ತು ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿನ ವೈಫಲ್ಯವು ರಾಜ್ಯದ ದಯನೀಯ ಆರ್ಥಿಕ ಸ್ಥಿತಿಗೆ ಸಾಕ್ಷಿಯಾಗಿದೆ” ಎಂದು ಅವರು ಆರೋಪಿಸಿದರು.
ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ದೂರಿದ ಅವರು, ರಾಜ್ಯದ ವಿವಿಧ ಇಲಾಖೆಗಳಲ್ಲಿ 2.85 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇರುವುದು ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದರು. ವಿದ್ಯಾರ್ಥಿ ನಿಲಯಗಳ ಕೊರತೆ, ವಿದ್ಯಾರ್ಥಿವೇತನ ವಿಳಂಬ ಮತ್ತು ಅತಿಥಿ ಉಪನ್ಯಾಸಕರ ವೇತನ ಬಾಕಿ ಇರುವ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.
ನೀರಾವರಿ ಯೋಜನೆಗಳಿಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಹಣವಿಲ್ಲದ ಸರ್ಕಾರ, ಮದ್ಯದ ಅಂಗಡಿಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಆದಾಯ ಕ್ರೋಢೀಕರಿಸಲು ಮುಂದಾಗಿರುವುದು ದುರದೃಷ್ಟಕರ ಎಂದು ವಿಜಯೇಂದ್ರ ಟೀಕಿಸಿದರು. ಬಜೆಟ್ ಚರ್ಚೆಯಾಗಿ ಸದನದಲ್ಲಿ ಅನುಮೋದನೆಗೊಂಡಿರುವುದೇ ಶ್ವೇತಪತ್ರ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರಸ್ಕರಿಸಿದ ಅವರು, ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.
