ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದೆ. ಮಣ್ಣಿನ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಭೀತಿ ಎದುರಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಯನಾಡ್-ಕಲ್ಲಾಡಿ ಸುರಂಗ ಮಾರ್ಗ ನಿರ್ಮಾಣ ಪ್ರದೇಶದ ಗುಡ್ಡದ ಅವಶೇಷಗಳು ಕುಸಿದು ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ. ಕಲ್ಪೆಟ್ಟಾದಿಂದ ಧಾವಿಸಿರುವ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಎಎನ್ಐ ವರದಿಯ ಪ್ರಕಾರ, ಘಟನೆಯಲ್ಲಿ ಗಾಯಗೊಂಡಿರುವ ಆರು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಂಗ ಯೋಜನೆಯ ಕಾರ್ಮಿಕರು ತಂಗಿದ್ದ ಈ ಪ್ರದೇಶದಿಂದ ಸ್ಥಳೀಯ ನಿವಾಸಿಗಳು ಮೂವರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತು ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ವಯನಾಡ್ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಪರಿಶೀಲನೆ ನಡೆಸಿದ್ದಾರೆ.
ಮೀನಂಗಡಿಯಲ್ಲಿ ಬೀಡುಬಿಟ್ಟಿರುವ ಎನ್ಡಿಆರ್ಎಫ್ (NDRF) ತಂಡ ತಕ್ಷಣವೇ ದುರಂತದ ಸ್ಥಳಕ್ಕೆ ತಲುಪಲಿದ್ದು, ಕೋಳಿಕೋಡ್ ಎನ್ಡಿಆರ್ಎಫ್ ತಂಡಕ್ಕೂ ವಯನಾಡ್ಗೆ ತೆರಳಲು ಸೂಚಿಸಲಾಗಿದೆ.
