“ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ!” ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹರನ್ನು ಉಲ್ಲೇಖಿಸಿದ ಸಚಿವ ಪ್ರಿಯಾಂಕ್ ಖರ್ಗೆ “ಎಲ್ಲಾ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು!” ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ಪ್ರಿಯಾಂಕ್ ಖರ್ಗೆಯ ಅರ್ಹತೆ ಏನು ಎಂಬ ಬಗ್ಗೆ ಕೇಳಿದ ಪ್ರತಾಪ್ ಸಿಂಹರಿಗೆ “ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
“ಪಂಚಾಯತ್ ರಾಜ್ ವಿಕೇಂದ್ರಿಕರಣದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿದೆ ಎಂದು ಹೇಳಿದ್ದು ಕೇಂದ್ರ ಸರ್ಕಾರ. ಕರ್ನಾಟಕದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ದಾಖಲೆಯ ಸಾಧನೆ ಮಾಡಿದೆ ಎಂದು ಒಪ್ಪಿಕೊಂಡಿದ್ದು ಕೇಂದ್ರ ಸರ್ಕಾರ. ಐಟಿ ರಫ್ತಿನಲ್ಲಿ 38% ಪಾಲು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ, ಅತಿ ಹೆಚ್ಚು R&D ಕೇಂದ್ರಗಳನ್ನು ಹೊಂದುವ ಮೂಲಕ ನವೋದ್ಯಮಗಳಿಗೆ ಉತ್ತೇಜನ ನೀಡುವ ಪ್ರಥಮ ರಾಜ್ಯ ಕರ್ನಾಟಕ. ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ, ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
“ಅಂದಹಾಗೆ ಪ್ರತಾಪ್ ಸಿಂಹ ಅವರೇ, ನಿಮ್ಮ ನರೇಂದ್ರ ಮೋದಿಯವರ ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ?” ಎಂದು ಪ್ರತಾಪ್ ಸಿಂಹರಿಗೆ ಮೋದಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

“ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ?” ಎಂದು ಗಂಭೀರವಾಗಿ ಪ್ರಶ್ನಿಸಿದ್ದಾರೆ.