ನವದೆಹಲಿಯ ಸಂಸತ್ ಭವನದಲ್ಲಿ ನಡೆದ ಸರ್ವಪಕ್ಷಗಳ ಸಭೆ ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯಲ್ಲಿ ನಡೆದಿದೆ. ನಿನ್ನೆಯಷ್ಟೇ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಸರ್ವಪಕ್ಷಗಳ ಸಭೆಯಲ್ಲಿ ಭಾಗವಹಿಸಿ ಆಪರೇಷನ್ ಸಿಂಧೂರ್ ಬಗ್ಗೆ ವಿವರಣೆ ನೀಡಲಿದ್ದಾರೆ ಎಂಬ ಭರವಸೆ ಇದೆ ಎಂದು ಹೇಳಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಗೈರು ಚರ್ಚೆಗೆ ಗ್ರಾಸವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ಚಟುವಟಿಕೆಗೆ ಪ್ರತಿಕಾರವಾಗಿ ನಡೆದ ಆಪರೇಷನ್ ಸಿಂಧೂರ್ ಭಾರತೀಯ ಸೇನೆಗೆ ದೊಡ್ಡ ಕೀರ್ತಿ ತಂದ ಕಾರ್ಯ. ಅದಾದ ನಂತರ ಕರೆದ ಸರ್ವಪಕ್ಷಗಳ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿ ಆ ಸ್ಥಾನಕ್ಕಿರುವ ಗಂಭೀರತೆಗೆ ಮತ್ತು ಜವಾಬ್ದಾರಿಗೆ ಸಾಕ್ಷಿ. ಹೀಗಿರುವಾಗ ಇಂತಹ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸದೇ ಇರುವುದರ ಬಗ್ಗೆ ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.
ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸು ಹಾಗೂ ನಂತರದ ಬೆಳವಣಿಗೆಗಳನ್ನು ಕುರಿತು ಈಗಾಗಲೇ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಯಲ್ಲಿ ವಿವರಣೆ ನೀಡಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಸಂಸತ್ ಭವನದಲ್ಲಿ ಈ ಸಭೆ ನಡೆಯುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಜೆ.ಪಿ.ನಡ್ಡಾ, ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರದ ಪರವಾಗಿ ಹಾಜರಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದಿಂದ ಭಾಗವಹಿಸಿದ್ದಾರೆ.
ಇತರ ಪ್ರತಿಪಕ್ಷಗಳಾದ ಸಂದೀಪ್ ಬಂಡೋಪಾಧ್ಯಾಯ (ಟಿಎಂಸಿ), ಟಿ.ಆರ್. ಬಾಲು (ಡಿಎಂಕೆ), ರಾಮ್ ಗೋಪಾಲ್ ಯಾದವ್ (ಸಮಾಜವಾದಿ ಪಕ್ಷ), ಸಂಜಯ್ ಸಿಂಗ್ (ಎಎಪಿ), ಸಂಜಯ್ ರಾವುತ್ (ಶಿವ ಸೇನಾ, ಯುಬಿಟಿ), ಸುಪ್ರಿಯಾ ಸುಳೆ (ಎನ್ಸಿಪಿ ಶರದ್ ಪವಾರ್) ಭಾಗವಹಿಸಿದ್ದಾರೆ. ಸಂಜಯ್ ಝಾ (ಜೆಡಿಯು), ಎಲ್ಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರೂ ಸಭೆಯಲ್ಲಿ ಭಾಗಿಯಾಗಿದ್ದಾರೆ.