ಮೈಸೂರು: ಜೆಡಿಎಸ್ ಶಾಸಕರು ಕಾಂಗ್ರೆಸ್ಸಿನ ಬಾಗಿಲು ಬಡಿಯುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಎಮ್ ಲಕ್ಷ್ಮಣ್ ತಿಳಿಸಿದ್ದಾರೆ.
ಅತ್ತ ಕುಮಾರಸ್ವಾಮಿ ಬಿಜೆಪಿಯೊಡನೆ ನೆಂಟಸ್ತಿಕೆ ಬೆಳೆಸುವ ಓಡಾಟದ್ಲಲಿದ್ದರೆ ಇತ್ತ JDS ಪಕ್ಷದ 9 ಶಾಸಕರು ಕಾಂಗ್ರೆಸ್ ಪಕ್ಷದ ಬಾಗಿಲು ತಟ್ಟುತ್ತಿದ್ದಾರೆ ಎನ್ನುತ್ತಿದ್ದಾರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ವಕ್ತಾರ ಎಮ್ ಲಕ್ಷ್ಮಣ್.
ಹೌದು, ಇಂದು ಅವರು ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಡನೆ ಮಾತನಾಡುತ್ತಾ, ʼಕುಮಾರಸ್ವಾಮಿ ಅವರ ರಾಜಕೀಯ ನಡೆಗೆ ಬೇಸತ್ತು ಯಾವುದೇ ಅಧಿಕಾರದ ಆಸೆಯಿಲ್ಲದೆ ಜೆಡಿಎಸ್ ಪಕ್ಷದ 9 ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧರಾಗಿದ್ದಾರೆ. ಆದರೆ ಅವರು ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರೋದಾದರೆ, ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿಯವರಂತೆ ಆಪರೇಷನ್ ಮಾಡುವ ವ್ಯವಸ್ಥೆ ನಮ್ಮಲ್ಲಿ ಇಲ್ಲʼ ಎಂದು ತಿಳಿಸಿದರು.
ʼಮಾಜಿ ಸಿ ಎಮ್ ಕುಮಾರಸ್ವಾಮಿಯವರು ಬಟ್ಟೆ ಬಿಚ್ಚಿಕೊಂಡು ಹೋರಾಡುತ್ತಿದ್ದಾರೆ. ಆದರೆ ಅವರ ಪಕ್ಷ ಇನ್ನೂ ಕೆಲವೇ ದಿನಗಳಲ್ಲಿ ಮೂರು ಹೋಳಾಗಲಿದೆ. UPA – NDA ಎರಡೂ ಮೈತ್ರಿಕೂಟಗಳೂ ಅವರನ್ನು ದೂರವಿಟ್ಟಿವೆʼ ಎಂದು ಅವರು ವ್ಯಂಗ್ಯವಾಡಿದರು.
ʼಐಎಎಸ್ ಅಧಿಕಾರಿಗಳನ್ನು ಶಿಷ್ಟಾಚಾರ ಪಾಲನೆಗೆ ಕಳುಹಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ವಿರೋಧ ಪಕ್ಷಗಳು ಗೃಹಲಕ್ಷ್ಮಿ ಯೋಜನೆಗೆ ಪ್ರಚಾರ ಸಿಗಬಾರದು ಎಂದು ಗಲಾಟೆ ಎಬ್ಬಿಸುತ್ತಿದ್ದಾರೆʼ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಕಾರ್ಯದರ್ಶಿ ಶಿವಣ್ಣ ಕಾಂಗ್ರೆಸ್ ಮುಖಂಡ ಬಿ.ಎಂ.ರಾಮು, ಗಿರೀಶ್, ಮಾಧ್ಯಮ ವಕ್ತಾರ ಮಹೇಶ್ ಉಪಸ್ಥಿತರಿದ್ದರು.