ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬೆಂಬಲ ಕುಮ್ಮಕ್ಕು ಇಲ್ಲದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ಮಾಡಲು ಸಾಧ್ಯವಿಲ್ಲ ಎಂದು ವಕ್ಫ್ ತಿದ್ದುಪಡಿ ಕಾಯ್ದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಶ್ರೀ ಜಗದಂಬಿಕಾ ಪಾಲ್ ಅವರು ರೈತರ ಅಹವಾಲು ಸ್ವೀಕರಿಸಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದಲ್ಲಿ ಹಲವೆಡೆ ವಕ್ಫ್ ಸೃಷ್ಟಿಸಿರುವ ಆತಂಕದ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ವಕ್ಫ್ ಜಂಟಿ ಸಂಸದೀಯ ಸಮಿತಿಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸಮಿತಿ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ರೈತರು, ಬಡವರು, ಮಠಗಳು, ಮಂದಿರಗಳಿಗೆ ನೀಡಿರುವ ನೋಟಿಸ್ಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್ ಬೋರ್ಡ್ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಈ ಬಗ್ಗೆ ಎಲ್ಲಾ ಮಾಹಿತಿ ಪಡೆದು ಸತ್ಯಾಸತ್ಯತೆ ತಿಳಿದು ವರದಿ ನೀಡುವುದಾಗಿ ಸಮಿತಿಯ ಅಧ್ಯಕ್ಷ ಶ್ರೀ ಜಗದಂಬಿಕಾ ಪಾಲ್ ಅವರು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿದ್ದ ವಕ್ಫ್ ರಾಜಕಾರಣಕ್ಕೆ ಇದರೊಂದಿಗೆ ಕೇಂದ್ರವೂ ಪ್ರವೇಶ ಪಡೆದಂತಾಗಿದೆ.
ರಾಜ್ಯ ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಅವರು ವಕ್ಫ್ ತಿದ್ದುಪಡಿ ಕಾಯ್ದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಶ್ರೀ ಜಗದಂಬಿಕಾ ಪಾಲ್ ಅವರು ಈ ವಿಷಯದಲ್ಲಿ ಮೂಗು ತೂರಿಸುವುದು ಸರಿಯಲ್ಲ, ಇದಕ್ಕೆ ಅವರಿಗೆ ಅಧಿಕಾರವಿಲ್ಲ ಎಂದು ವಾದಿಸಿದ್ದರು.
ಇದೀಗ ಜಗದಾಂಬಿಕ ಪಾಲ್ ಅವರ ಕರ್ನಾಟಕ ಭೇಟಿ ಮುಗಿದಿದ್ದು, ಇನ್ನಷ್ಟೇ ಸಚಿವರು ಪ್ರತಿಕ್ರಿಯೆ ನೀಡಬೇಕಿದೆ.