ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ತನಿಖೆ ಕುರಿತು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಗಂಭೀರ ಹೆಜ್ಜೆ ಇಟ್ಟಿದೆ. ತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.

ಧರ್ಮಸ್ಥಳದಲ್ಲಿ ಸಂಭವಿಸಿದ್ದಾಗಿ ಹೇಳಲಾಗುತ್ತಿರುವ ಅಸಹಜ ಸಾವುಗಳ ಕುರಿತು ಇದುವರೆಗೆ ನಡೆದ ತನಿಖೆಯ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ತಮ್ಮ ಪತ್ರದಲ್ಲಿ ಅವರು ಆಗ್ರಹಿಸಿದ್ದಾರೆ. ಈ ಹಿಂದೆಯೇ ಎಸ್ಐಟಿ ತನಿಖೆ ದಾರಿ ತಪ್ಪುತ್ತಿದೆ ಎಂದು ಆರೋಪಿಸಿದ್ದ ನಾಗಲಕ್ಷ್ಮಿ ಚೌಧರಿ, ಕೇವಲ ಸಿಕ್ಕಿರುವ ಬುರುಡೆಗಳ ತನಿಖೆಗೆ ಮಾತ್ರ ಸೀಮಿತವಾಗದೇ, ಅಲ್ಲಿ ನಡೆದಿದೆ ಎನ್ನಲಾಗುತ್ತಿರುವ ಎಲ್ಲಾ ಸಾವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದರು.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹೆಣ್ಣು ಮಕ್ಕಳ ಸಾವುಗಳ ಕುರಿತು ವಿಶೇಷ ಗಮನ ಹರಿಸಿ ತನಿಖೆ ನಡೆಸಬೇಕೆಂದು ಮಹಿಳಾ ಆಯೋಗ ಆಗ್ರಹಿಸಿದ್ದು, ಪ್ರಕರಣವನ್ನು ಕೇವಲ ‘ಚಿನ್ನಯ್ಯ’ ತನಿಖೆಗೆ ಮಾತ್ರ ಸೀಮಿತಗೊಳಿಸಬಾರದು ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದರು.