ಹಾಸನ, ಸೆ. 18: ನೂರು ದಿನದಲ್ಲಿ ತುಮಕೂರಿಗೆ ಎತ್ತಿನಹೊಳೆ ನೀರು ಹರಿಸುವ ಗುರಿಯಿದೆ. ಹಾಗಾಗಿ ಶೀಘ್ರದಲ್ಲೇ ತಾಲ್ಲೂಕಿನ ಜನತೆ ನದಿ ನೀರನ್ನು ನೋಡುವ ದಿನಗಳು ಬರಲಿವೆ. ಕುಡಿಯುವ ನೀರು ಸಿಗಲಿದೆ, ಕೆರೆಗಳು ತುಂಬಲಿವೆ, ಅಂತರ್ಜಲ ವೃದ್ಧಿಸಿ ಕೊಳವೆಬಾವಿಗಳಲ್ಲಿ ನೀರು ಸಿಗಲಿದೆ ಎಂದು ಅಬಕಾರಿ ಸಚಿವರು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಸೀಕೆರೆ ಶಾಸಕರಾದ ಕೆ. ಎಂ. ಶಿವಲಿಂಗೇಗೌಡ ಅವರು ಆಶಾಭಾವ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ತಳಲುತೊರೆಯಲ್ಲಿ ನಿರ್ಮಾಣವಾಗುತ್ತಿರುವ ಎತ್ತಿನಹೊಳೆ ಯೋಜನೆ ಗುರುತ್ವ ಕಾಲುವೆ ಪ್ಯಾಕೇಜ್-8ರ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗಬಾರದು. ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ನದಿ ನೀರಿನ ಹರಿವಿಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಗ್ರಾಮದ ಶ್ರೀರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ತಳಲುತೊರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಗೀತಾಕುಮಾರಿ, ಮಾಜಿ ಎಂಎಲ್ಸಿ ಗೋಪಾಲಕೃಷ್ಣ, ಸ್ಥಳೀಯ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
